ಗಿರೀಶ್ ಮಟ್ಟಣ್ಣನವರ್ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ನಿರ್ದೇಶನ ನೀಡಿದೆ.
ಗಿರೀಶ್ ಮಟ್ಟಣ್ಣನವರ್ ವಿರುದ್ಧ ದೂರು ಸಲ್ಲಿಕೆಯಾದರೂ ತನಿಖೆ ಕೈಗೊಳ್ಳದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್ ಆಯೋಗಕ್ಕೆ ಸೂಚಿಸಿದೆ.
ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹ ಮತ್ತು ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ವಿರುದ್ಧ ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ಗಿರೀಶ್ ಮಟ್ಟಣ್ಣನವರ್ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಆಗ್ರಹಿಸಿ ಬೆಂಗಳೂರಿನ ರಾಜಾಜಿನಗರ ಕಾವೇರಿ ಕೇದಾರನಾಥ ಅವರ ನೇತೃತ್ವದ ನಿಯೋಗಕ್ಕೆ ಇದೇ ವರ್ಷದ ಆಗಸ್ಟ್ ೨೯ರಂದು ರಾಜ್ಯ ಮಹಿಳಾ ಆಯೋಗಕ್ಕೆ ದೂರನ್ನು ಸಲ್ಲಿಸಿತ್ತು.
ಆದರೆ ದೂರು ಸಲ್ಲಿಕೆಯಾದರೂ ಮಹಿಳಾ ಆಯೋಗ ಮಟ್ಟಣ್ಣನವರ್ ಕೊಟ್ಟಿದ್ದ ಹೇಳಿಕೆ ಸಂಬಂಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ, ತನಿಖೆಯನ್ನೂ ನಡೆಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾವೇರಿ ಕೇದಾರನಾಥ ಅವರು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇವರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ಮಹಿಳಾ ಆಯೋಗಕ್ಕೆ ಸೂಚಿಸಿದೆ.


