ಗ್ರೇಟರ್ ಬೆಂಗಳೂರು (Greater Bengaluru) ನಗರದ ಸಿಗ್ನಲ್ಗಳಿಂದ 75 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಬಸ್ ಅಥವಾ ಇತರೆ ವಾಹನಗಳ ನಿಲುಗಡೆಗೆ ಅವಕಾಶ ನೀಡಬಾರದು. ಈ ಕುರಿತು ಸಂಚಾರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.
ಪಾದಚಾರಿ ಮಾರ್ಗಗಳಲ್ಲಿ ಪಾರ್ಕಿಂಗ್ಗೆ ಅವಕಾಶವಿಲ್ಲ:
ಪಾದಚಾರಿ ಮಾರ್ಗಗಳು ಸಾರ್ವಜನಿಕರ ಸಂಚಾರಕ್ಕಾಗಿ ನಿರ್ಮಿಸಲಾಗಿದ್ದು, ವಾಹನ ನಿಲುಗಡೆಗಾಗಿ ಅಲ್ಲ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪಾದಚಾರಿ ಮಾರ್ಗಗಳಲ್ಲಿ ವಾಹನಗಳನ್ನು ನಿಲ್ಲಿಸಿದರೆ ಯಾವುದೇ ಮುಲಾಜಿಲ್ಲದೆ ಟೋಯಿಂಗ್ ಮೂಲಕ ತೆರವುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಾರಸುದಾರರಿಲ್ಲದ ವಾಹನಗಳ ತೆರವಿಗೆ ಕ್ರಮ:
ಜುಲೈ 1 ರಿಂದ ನಗರದಾದ್ಯಂತ ವಾರಸುದಾರರಿಲ್ಲದೆ ರಸ್ತೆ ಬದಿಯಲ್ಲಿ ನಿಂತಿರುವ ವಾಹನಗಳಿಗೆ ನೋಟಿಸ್ ಸ್ಟಿಕ್ಕರ್ ಅಂಟಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸ್ಟಿಕ್ಕರ್ ಅಂಟಿಸಿದ ಬಳಿಕ 7 ದಿನಗಳ ಕಾಲಾವಕಾಶ ನೀಡಲಾಗುವುದು. ನಂತರವೂ ವಾಹನಗಳನ್ನು ತೆರವುಗೊಳಿಸದಿದ್ದಲ್ಲಿ ಜುಲೈ 10ರಿಂದ ಟೋಯಿಂಗ್ ಮೂಲಕ ತೆರವುಗೊಳಿಸಿ ಹರಾಜು ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪಾದಚಾರಿ ಮಾರ್ಗಗಳ ದುರಸ್ತಿಗೆ ₹70 ಕೋಟಿ:
ನಗರದ ಐದು ಪಾಲಿಕೆಗಳ ವ್ಯಾಪ್ತಿಯ ಸುಮಾರು 2,000 ಕಿ.ಮೀ ಪಾದಚಾರಿ ಮಾರ್ಗಗಳಲ್ಲಿ ಕಂಡುಬರುವ ನ್ಯೂನತೆಗಳನ್ನು ಸರಿಪಡಿಸಲು ₹70 ಕೋಟಿ ಅನುದಾನ ಮೀಸಲಿಡಲಾಗಿದೆ. ಸ್ಲ್ಯಾಬ್ಗಳು, ಕರ್ಬ್ ಸ್ಟೋನ್ಗಳು, ಲೆವೆಲ್ ವ್ಯತ್ಯಾಸಗಳು ಸೇರಿದಂತೆ ಅಗತ್ಯ ದುರಸ್ತಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಪ್ರಮುಖ ರಸ್ತೆಗಳಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ:
ಜುಲೈ 1ರಿಂದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳ ಪಾದಚಾರಿ ಮಾರ್ಗಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ತಳ್ಳುಗಾಡಿಗಳ ಮೂಲಕ ವ್ಯಾಪಾರ ಮಾಡಲು ಅವಕಾಶ ಇರುವುದಿಲ್ಲ. ನಿಯಮ ಉಲ್ಲಂಘಿಸಿದಲ್ಲಿ ತಳ್ಳುಗಾಡಿಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು. ಇತರೆ ಅನುಮತಿತ ಪ್ರದೇಶಗಳಲ್ಲಿ ಮಾತ್ರ ವ್ಯಾಪಾರ ನಡೆಸಬಹುದು ಎಂದು ಹೇಳಿದರು.
ಬಾಕ್ಸ್ ಕಟಿಂಗ್ ಮೂಲಕ ರಸ್ತೆ ಗುಂಡಿ ಮುಚ್ಚಲು ಸೂಚನೆ:
ನಗರದ ರಸ್ತೆ ಗುಂಡಿಗಳನ್ನು ವೈಜ್ಞಾನಿಕ ವಿಧಾನದಲ್ಲಿ ಬಾಕ್ಸ್ ಕಟಿಂಗ್ ಮಾಡಿ, ಜೆಲ್ಲಿ ತುಂಬಿ, ಡಾಂಬರೀಕರಣ ನಡೆಸಿ ರಸ್ತೆ ಮಟ್ಟಕ್ಕೆ ಸಮನಾಗಿ ದುರಸ್ತಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲು ಮುಂದಿನ ದಿನಗಳಲ್ಲಿ ಆಧುನಿಕ ಯಂತ್ರೋಪಕರಣಗಳ ಬಳಕೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ ಎಂದರು.
ಸಿಗ್ನಲ್ ಹಾಗೂ ಜಂಕ್ಷನ್ಗಳ ದುರಸ್ತಿಗೆ ಆದ್ಯತೆ:
ನಗರದ ಪ್ರಮುಖ ಜಂಕ್ಷನ್ಗಳು ಹಾಗೂ ಸಿಗ್ನಲ್ಗಳಲ್ಲಿ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ರಸ್ತೆ ಗುಂಡಿಗಳು, ರಸ್ತೆ ಮೇಲ್ಮೈ ಹಾನಿ ಸೇರಿದಂತೆ ಇತರೆ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸೂಚಿಸಲಾಗಿದೆ. ಸಿಗ್ನಲ್ಗಳ ಸಮೀಪ ಅಳವಡಿಸಿರುವ ಅನಗತ್ಯ ಹಂಪ್ಗಳನ್ನು ತೆರವುಗೊಳಿಸುವಂತೆಯೂ ಸೂಚಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ್ ಸುನೀಲ್ ಕುಮಾರ್, ಜಿ. ಜಗದೀಶ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಸಂಚಾರ ಪೊಲೀಸ್ ವಿಭಾಗದ ಜಂಟಿ ಆಯುಕ್ತರಾದ ಕಾರ್ತಿಕ್ ರೆಡ್ಡಿ, ಅಪರ ಆಯುಕ್ತರು, ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


