ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬಸವನಗೌಡ ಬಾದರ್ಲಿ, ಮಂಜುನಾಥಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ನಾರಾಯಣಿ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಈ ಆದೇಶ ಮಾಡಿದೆ.
ಪ್ರಕರಣದ ಮೊದಲನೇ ಆರೋಪಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪರ ವಕೀಲರು ವಿಚಾರಣೆಗೆ ಹಾಜರಾಗಿ, ಡಿ ಕೆ ಶಿವಕುಮಾರ್ ಗೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದರು. ಇದನ್ನು ಕೋರ್ಟ್ ಪರಿಗಣಿಸಿತು. ಏಪ್ರಿಲ್ 27ರ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಡಿ ಕೆ ಶಿವಕುಮಾರ್ ಗೆ ನಿರ್ದೇಶಿಸಿದೆ.
ಕಳೆದ ವಿಚಾರಣೆ ವೇಳೆ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆಯಲ್ಲಿ ಶಫೀವುಲ್ಲಾ ಮತ್ತು ಸಲೀಂ ಮೊಹಮ್ಮದ್ ವಿಚಾರಣೆಗೆ ಖುದ್ದು ಹಾಜರಾಗಿ ಜಾಮೀನು ಪಡೆದುಕೊಂಡರು.
ಆದರೇ, ಕೋರ್ಟ್ ಆದೇಶದ ಹೊರತಾಗಿಯೂ ವಿಚಾರಣೆಗೆ ಗೈರಾದ ಈಶ್ವರ್ ಖಂಡ್ರೆ, ಎನ್ ಎಸ್ ಮಂಜುನಾಥ್ ಮತ್ತು ಬಸವನಗೌಡ ಬಾದರ್ಲಿಗೆ ಮತ್ತೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿ ನ್ಯಾಯಾಲಯ ಆದೇಶಿಸಿದೆ.
ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪ ಸಂಬಂಧ ಡಿ ಕೆ ಶಿವಕುಮಾರ್, ಈಶ್ವರ್ ಖಂಡ್ರೆ, ಎನ್ ಎಸ್ ಮಂಜುನಾಥ್, ಬಸವನಗೌಡ ಬಾದರ್ಲಿ, ಶಫೀವುಲ್ಲಾ ಮತ್ತು ಸಲೀಂ ಮೊಹಮ್ಮದ್ ವಿರುದ್ಧ ವಿಪತ್ತು ನಿರ್ವಹಣಾ ಕಾಯಿದೆ ಅಡಿ ನಾರಾಯಣಿ ಎಂಬುವವರು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.