ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಶ್ರೀ ಸಂತೋಷ ಪಾಟೀಲ್, ತನ್ನ ಸಾವಿಗೆ ಸಚಿವ ಶ್ರೀ ಈಶ್ವರಪ್ಪರವರೇ ನೇರ ಹೊಣೆಗಾರರೆಂದು ಡೆತ್ ನೋಟ್ ಬರೆದು, ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದೆ. ಆದ್ದರಿಂದ, ರಾಜ್ಯ ಸರಕಾರ ಈ ಕೂಡಲೇ ಸಚಿವ ಶ್ರೀ ಈಶ್ವರಪ್ಪರವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಬಂದಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಕರ್ನಾಟಕ ರಾಜ್ಯ ಸಮಿತಿ ಪಕ್ಷ ಒತ್ತಾಯಿಸಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿಪಿಐ(ಎಂ) ಕಾರ್ಯದರ್ಶಿ ಯು. ಬಸವರಾಜ ಅವರು, ಪ್ರತಿಯೊಂದು ಗುತ್ತಿಗೆ ಕೆಲಸದಲ್ಲಿ ರಾಜ್ಯ ಸರಕಾರದ ಸಚಿವರು, ಶಾಸಕರು, ಅಧಿಕಾರಿಗಳು, ಒಟ್ಟು ಕಾಮಗಾರಿಯ ಶೇ 40 ರಷ್ಢು ಕಮಿಷನ್ ಪಡೆಯುತ್ತಿರುವುದಾಗಿ ಮತ್ತು ಇದರಿಂದ ಕಾಮಗಾರಿ ನಿರ್ವಹಣೆಗೆ, ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗಿದೆಯೆಂದು, ಇದನ್ನು ತಡೆಯಲು ಅಗತ್ಯ ಕ್ರಮವಹಿಸುವಂತೆ ಸ್ವತಃ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ದೇಶದ ಪ್ರಧಾನ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದು ಕಳೆದ ಐದಾರು ತಿಂಗಳುಗಳ ಹಿಂದೆಯೇ ಒತ್ತಾಯಿಸಿದುದನ್ನು ಇಲ್ಲಿ ಸಕಾರಣವಾಗಿ ನೆನಪಿಸಿಕೊಳ್ಳಬಹುದು. ಆಗ ಸಿಪಿಐಎಂ ಪಕ್ಷವು ಸದರಿ ಪ್ರಕರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೊಳಪಡಿಸಬೇಕೆಂದು ಮತ್ತು ಕಾಮಗಾರಿಗಳ ಕಳಪೆತನವನ್ನು ಹಾಗೂ ಕಾಮಗಾರಿಗಳು ನಡೆಯದೇ ಬಿಲ್ ಮಾಡುವುದನ್ನು ತಡೆಯುವಂತೆ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿತ್ತು.
ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಆ ಕುರಿತು ಸೂಕ್ತ ಕ್ರಮವಹಿಸಿದ್ದರೇ ಈ ದಿನ ದೇಶಕ್ಕೆ ಗುತ್ತಿಗೆ ಸೇವೆಯನ್ನು ಒದಗಿಸುತ್ತಿದ್ದ ಒಂದು ಅಮೂಲ್ಯ ಜೀವ ಶ್ರೀ ಸಂತೋಷ ಪಾಟೀಲ್ ನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನು ತಡೆಯ ಬಹುದಿತ್ತು. ಇದರಿಂದಾಗಿ ಅವರ ಕುಟುಂಬ ಬೀದಿಗೆ ಬೀಳುವಂತಾಯಿತು. ಈ ಕುರಿತು ಪರಿಣಾಮಕಾರಿ ಕ್ರಮ ತಗೆದುಕೊಳ್ಳದೇ ಜವಾಬ್ದಾರಿ ಹೀನ ರೀತಿಯ ವರ್ತನೆ ತೋರಿದುದು ತೀವ್ರ ಖಂಡನೀಯವಾಗಿದೆ.
ಈಗಲಾದರೂ ಇನ್ನಷ್ಠು ಗುತ್ತಿಗೆದಾರರು ಅತ್ಮಹತ್ಯೆಗಿಳಿಯದಂತೆ ಮತ್ತು ಅವರ ಕುಟುಂಬಗಳು ಬೀದಿ ಪಾಲಾಗದಂತೆ ತಡೆಯಲು ಶ್ರೀ ಸಂತೋಷ ಪಾಟೀಲ ಪ್ರಕರಣವೂ ಸೇರಿದಂತೆ ಒಟ್ಟು ಈ ಕಮಿಷನ್ ಹಗರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೊಳಪಡಿಸುವಂತೆ ಒತ್ತಾಯಿಸುತ್ತದೆ ಎಂದು ಸಿಪಿಐ(ಎಂ) ಕಾರ್ಯದರ್ಶಿ ಯು. ಬಸವರಾಜ ಪ್ರಕಟಣೆಯಲ್ಲಿ ಹೇಳಿದ್ದಾರೆ.